Sunday 4 September 2016

ಗುರುದೇವೋ ಮಹೇಶ್ವರ..

ನನ್ನ ಎಲ್ಲಾ ಗುರುಗಳ ನೆನೆಯುತಾ..

ಗುರು ಬ್ರಹ್ಮ ಗುರು ವಿಷ್ಣು ಗುರುದೆವೋ ಮಹೇಶ್ವರ, 
ಗುರುಃ ಸಾಕ್ಷಾತ್ ಪರಬ್ರಹ್ಮ ತಸ್ಮೈಃ ಶ್ರೀ ಗುರವೇ ನಮಃ

ಎದೆಯ ಹಣತೆಯಲ್ಲಿ ಅಕ್ಷರದ ಆರದ ದೀಪ ಹೊತ್ತಿಸಿ ನಮ್ಮಂಥ ಅಗಣಿತ ಮಂದಿಯ ಬಾಳಿಗೆ ಭವ್ಯ ಬೆಳಕು ನೀಡಿದ ಪರಮ ಗುರುಗಳಿಗೆ, ಗುರುಸಮಾನರಿಗೆ ಶಿಕ್ಷಕ ದಿನಾಚರಣೆ ಯ ಶುಭಾಶಯಗಳು

ಗುರು ಎಂಬ ಶಬ್ದ ಎಷ್ಟೊಂದು ಪಾವನವಾದುದು ಮತ್ತು ಗೌರವಯುತವಾದುದು ಎಂದರೆ ಇದನ್ನು ಕೇಳಿದ ತಕ್ಷಣವೇ ಶಿಷ್ಯರ ತಲೆ ಗೌರವದಿಂದ ಸ್ವಯಂ ಆಗಿ ಬಾಗುತ್ತದೆ. ಎಲ್ಲೋ ದಟ್ಟ ಹಳ್ಳಿಯೊಂದರಲ್ಲಿ, ಮೂಲಭೂತ ಸೌಕರ್ಯವೂ ಇಲ್ಲದ ಶಾಲೆಯಲ್ಲಿ ಎಲ್ಲಾ ನೋವು ನುಂಗಿಕೊಂಡು, ತನ್ನನ್ನೇ ನೆಚ್ಚಿಕೊಂಡು ಬಂದ ಮಕ್ಕಳಿಗೆ ವಿದ್ಯೆಯನ್ನು ಧಾರೆಯೆರೆದು, ಅವರ ಭವಿಷ್ಯ ಉಜ್ವಲವಾಗಿಸುವಲ್ಲೇ ಸಂತೋಷ ಕಾಣುವ ಶಿಕ್ಷಕರ ಬಗ್ಗೆಯೂ ಆಗೀಗ್ಗೆ ಕೇಳುತ್ತೇವೆ.

ಮಗುವಿನ ಮನಸ್ಸು ಹಸಿ ಮಣ್ಣಿನಂತೆ. ಅದನ್ನು ಎರಡೂ ಕೈಗಳಿಂದ ಆದರದಿಂದ ತಟ್ಟಿ, ತಟ್ಟಿ ಸುಂದರವಾದ, ಕಲಾತ್ಮಕವಾದ ವಿಗ್ರಹ ರೂಪಿಸುವುದು ಗುರುವಿನ ಗುರಿ. ಗುರುವಿಲ್ಲದ ಗುರಿಯು ಕೂಡ ಸಾಧಿಸಲಸದಳ. ಅದಕ್ಕೇ ಹೇಳುವುದು ವಿದ್ಯೆಯು ದುಡ್ಡುಕೊಟ್ಟು ಖರೀದಿಸಬಲ್ಲ ಸೊತ್ತಲ್ಲ. ಅಥವಾ ವಿದ್ಯೆ ಎಂಬುದು ಮಾರಾಟದ ಸೊತ್ತೂ ಅಲ್ಲ. ವಿದ್ಯೆಯನ್ನಂತೂ ಕಿತ್ತುಕೊಳ್ಳಲು ಯಾರಿಂದಲೂ ಸಾಧ್ಯವೇ ಇಲ್ಲ.
ಗುರುವು ತನ್ನ ಶಿಷ್ಯರಿಗೆ, ತನ್ನನ್ನೇ ನಂಬಿ ಭವಿಷ್ಯ ರೂಪಿಸಲೆಂದು ಬಂದವರಿಗೆ ಇಂತಹ ವಿದ್ಯೆಯನ್ನು ಕೊಟ್ಟುಬಿಡುವುದಿಲ್ಲ, ಬದಲಾಗಿ ಕಾಯಾ, ವಾಚಾ, ಮನಸಾ ಧಾರೆಯೆರೆಯುತ್ತಾನೆ. ಆ ಮಟ್ಟಿಗೆ ಸಾರ್ಥಕ ಗುರುಗಳನ್ನು ಪಡೆದ ಇಂದಿನ ಮಕ್ಕಳು ಧನ್ಯರು.

 ನಮಗೆ ಗುರಿ ಮುಟ್ಟಲು ದಾರಿ ತೋರುವ, ಸದಾ ಕಾಲವೂ ಸಮಸ್ಯೆಗೆ ಸಮರ್ಪಕ ಪರಿಹಾರ ನೀಡುತ್ತಾ, ನಿಸ್ವಾರ್ಥ ಮನೋಭಾವದಿಂದ ದಾರಿದೀಪವಾಗುವ ಶಿಕ್ಷಕರನ್ನು ಇಂದಾದರೂ ನೆನೆಯೋಣ.

ಗುರುವು ಹೇಳುತ್ತಲೇ ಇರುವ ಒಂದು ವಾಕ್ಯ ಬಹುಶಃ ಎಲ್ಲರೂ ಕೇಳಿರಬಹುದು. "ಮಕ್ಕಳೇ, ನೀವು ಬೆಳೆದು ದೊಡ್ಡವರಾಗಿ, ನೀವೇನೂ ನನಗೆ ಗುರುದಕ್ಷಿಣೆ ಕೊಡಬೇಕಾಗಿಲ್ಲ. ಸತ್ಪಥದಲ್ಲಿ ಮುನ್ನಡೆದು ಹೆಸರು ಗಳಿಸಿದರೆ, ನಮಗದೇ ನೀವು ನೀಡುವ ಗುರುದಕ್ಷಿಣೆ". ಸಣ್ಣವರಿರುವಾಗ ಈ ಮಾತಿನ ಹಿಂದಿನ ಅರ್ಥ ನಮಗರಿವಾಗುತ್ತಿರಲಿಲ್ಲ. ಈಗೊಂದು ಬಾರಿ ಆ ಮಾತನ್ನು ನೆನಪಿಸಿಕೊಳ್ಳಿ. ಅದನ್ನಾಡುತ್ತಿದ್ದವರ ಹೃದಯಾಂತರಾಳ ನಮಗರ್ಥವಾಗುತ್ತದೆ! ತನ್ನ ಮಾರ್ಗದರ್ಶನ ಪಡೆದ ಮಗು ಜೀವನದಲ್ಲಿ ಯಶಸ್ವಿಯಾಗಬೇಕು ಎಂಬುದಷ್ಟೇ ಆ ಮನಸ್ಸಿನಲ್ಲಿರುವ ಏಕೈಕ ತುಡಿತ.
ಒಂದು ವಿಷಯ ಗೊತ್ತೇ? ಶಾಲೆಯಲ್ಲಿ ಪಾಠ ಕಲಿಸಿದವರು ಮಾತ್ರವೇ ಶಿಕ್ಷಕರಲ್ಲ. ಬದುಕಿನ ಪ್ರತಿಯೊಂದು ಹೆಜ್ಜೆಯಲ್ಲೂ ನಮಗೊಬ್ಬೊಬ್ಬ ಗುರು ಎದುರಾಗುತ್ತಾರೆ. ಶಾಲೆ ಮುಗಿಯಿತು, ಇನ್ನು ಶಿಕ್ಷಕರ ಹಂಗಿಲ್ಲ ಎಂದುಕೊಳ್ಳುವಂತಿಲ್ಲ. ನಮ್ಮ ಜೀವನಕ್ಕೆ ಭದ್ರವಾದ ಬುನಾದಿ ಹಾಕಿಕೊಡುವ ಶಿಕ್ಷಕರ ಒಂದು ಪಾತ್ರವು ಅಲ್ಲಿಗೆ ಮುಕ್ತಾಯವಾಗುತ್ತದೆಯಷ್ಟೆ. ಅದೇ ಪಾತ್ರವು ಮುಂದೆ ಜೀವನ ಎಂದರೇನೆಂದು ಅರಿವು ಮೂಡುತ್ತಿರುವ ಸಂದರ್ಭದಲ್ಲಿ ಹೆಜ್ಜೆ ಹೆಜ್ಜೆಗೂ ಬಂದು ಮುಖತೋರಿಸುತ್ತದೆ. ಮಗೂ ದಾರಿ ತಪ್ಪುತ್ತಿದ್ದೀಯಾ, ಈ ದಾರಿಯಲ್ಲಿ ಹೋದರೆ ಒಳ್ಳೆಯದು ಮತ್ತು ಯಶಸ್ಸು ಸಾಧಿಸುವೆ ಅಂತ ದಾರಿ ದೀಪವಾಗುತ್ತಿರುತ್ತದೆ. ಇದು ಜ್ಞಾತ ಎಚ್ಚರಿಕೆಯಾಗಬಹುದು, ಇಲ್ಲವೇ ಹಿಂದಿನ ಗುರುವಿನ ಬೋಧನೆಯಿಂದ ನಮ್ಮ ಒಳಮನಸ್ಸಿನಾಳದಿಂದ ಹೊರಡುವ ಅಜ್ಞಾತ ಸಂದೇಶವೂ ಆಗಿರಬಹುದು.
ಒಮ್ಮೆ ಆ ಮಹಾತ್ಮನಲ್ಲಿಗೆ ತೆರಳಿ, "ಗುರುಗಳೇ, ನಾನೀಗ ಹೀಗಿದ್ದೇನೆ, ಈ ಮಟ್ಟಕ್ಕೇರಿದ್ದೇನೆ. ಎಲ್ಲವೂ ನಿಮ್ಮಿಂದಾಗಿ, ನಿಮ್ಮ ಆಶೀರ್ವಾದದಿಂದಾಗಿ" ಅಂತ ಹೇಳಿಬಿಡಿ ನೋಡೋಣ... ಆ ಹಿರಿ ಹೃದಯ ಹಿರಿ ಹಿರಿಹಿಗ್ಗುತ್ತದೆ. ಮನತುಂಬುತ್ತದೆ. ಕಂಗಳು ಹೊಳೆಯುತ್ತವೆ. ಮುಖದಲ್ಲಿ ಧನ್ಯತಾ ಭಾವವಿರುತ್ತದೆ. ಚಿಕ್ಕವರಿರುವಾಗ ನಮ್ಮನ್ನು ತಿದ್ದಿ ತೀಡುವುದರಲ್ಲೇ ಜೀವನ ಸವೆಸಿದ ಅದೇ ಮುಖಾರವಿಂದದಲ್ಲಿ ಸಾರ್ಥಕತೆಯ ಗೆರೆಗಳು ಗೋಚರಿಸುತ್ತವೆ.
ಜೀವನದ ಪ್ರತಿಯೊಂದು ಹೆಜ್ಜೆಯಲ್ಲೂ ಒಳಮನಸ್ಸಿನ ರೂಪದಲ್ಲಿ ಚಿರಸ್ಥಾಯಿಯಾಗಿದ್ದುಕೊಂಡು ಜೀವನ ಮುನ್ನಡೆಸುವ, ಗುರಿಯಿಲ್ಲದಾಗ ಗುರುವಾಗುವ ಮತ್ತು ಗುರುವಾಗಿದ್ದುಕೊಂಡು ಗುರಿ ತೋರಿಸುವ, ಆ ಗುರುವೆಂಬೋ ಶಕ್ತಿಗಿದೋ ಹೃದಯದಾಳದ ನಮನ.

Monday 9 May 2016

ಅಕ್ಷಯವಾಗಲಿ ನಮ್ಮೆಲ್ಲರ ಬಾಂಧವ್ಯ
ಅಕ್ಷಯವಾಗಲಿ ಪ್ರೀತಿ ವಿಶ್ವಾಸ
ಅಕ್ಷಯವಾಗಲಿ ಸ್ನೇಹ ಗೆಳೆತನ
ಅಕ್ಷಯವಾಗಲಿ ಮಮತೆ
ಅಕ್ಷಯವಾಗಲಿ ಒಲವು
ಅಕ್ಷಯವಾಗಲಿ ಗೆಲುವು
 ಅಕ್ಷಯವಾಗಲಿ ಉತ್ತಮ ಆರೋಗ್ಯ
ಅಕ್ಷಯವಾಗಲಿ ನಂಬಿಕೆ ವಿಶ್ವಾಸ
ಅಕ್ಷಯವಾಗಲಿ ಅಭಿವೃದ್ಧಿ
ಅಕ್ಷಯವಾಗಲಿ ಕಾರ್ಯಸಿದ್ಧಿ
ಅಕ್ಷಯ ತೃತೀಯದ ಈ ಶುಭದಿನದಂದು ಕಷ್ಟ, ಚಿಂತೆ ನೋವು ಕ್ಷಯವಾಗಲಿ,
ಸದಾ ಆನಂದ ನಿಮ್ಮದಾಗಲಿ.....

Friday 8 April 2016

ಯುಗಾದಿ .....

ಬದುಕಿಗೆ ಕನಸುಗಳ ತೋರಣ ಕಟ್ಟೋಣ...
ಯುಗಾದಿ ಕವಿತೆಗಳ ಆಸ್ವಾದಿಸೋಣ..
ಕವಿತೆಗಳನ್ನು ಹುಡುಕಲು ಸಹಕರಿಸಿದ ದೀಪು ಮತ್ತು ರವಿ ಗೆ ವಂದನೆಗಳು ....ಹಾಗೆಯೇ ನಾನೂ  ಬ್ಲಾಗಿಗನಾಗಬೇಕು ಎಂಬ ಬಹಳ ದಿನಗಳ ಕನಸನ್ನು ನನಸಾಗಿಸಿದ ಹರ್ಷನಿಗೂ ಧನ್ಯವಾದಗಳು.....
ಮತ್ತೊಮ್ಮೆ ಎಲ್ಲರಿಗೂ ಯುಗಾದಿಯ ಶುಭಾಶಯಗಳು.

ವರಕವಿ ದ.ರಾ. ಬೇಂದ್ರೆಯವರ ‘ಯುಗಾದಿ’

ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷಕೆ
ಹೊಸತು ಹೊಸತು ತರುತಿದೆ.

ಹೊಂಗೆಹೂವ ತೊಂಗಲಲ್ಲಿ
ಭೃಂಗದ ಸಂಗೀತಕೇಲಿ
ಮತ್ತೆ ಕೇಳಿಬರುತಿದೆ.
ಬೇವಿನ ಕಹಿ ಬಾಳಿನಲ್ಲಿ
ಹೂವಿನ ನಸುಗಂಪು ಸೂಸಿ
ಜೀವಕಳೆಯ ತರುತಿದೆ.

ಕಮ್ಮನೆ ಬಾಣಕ್ಕೆ ಸೋತು
ಜುಮ್ಮನೆ ಮಾಮರವು ಹೂತು
ಕಾಮಗಾಗಿ ಕಾದಿದೆ.
ಸುಗ್ಗಿ ಸುಗ್ಗಿ ಸುಗ್ಗಿ ಎಂದು
ಹಿಗ್ಗಿ ಗಿಳಿಯ ಸಾಲು ಸಾಲು
ತೋರಣದೊಲು ಕೋದಿದೆ.

ವರುಷಕೊಂದು ಹೊಸತು ಜನ್ಮ
ಹರುಷಕೊಂದು ಹೊಸತು ನೆಲೆಯು
ಅಖಿಲ ಜೀವಜಾತಕೆ!
ಒಂದೆ ಒಂದು ಜನ್ಮದಲ್ಲಿ
ಒಂದೆ ಬಾಲ್ಯ ಒಂದೆ ಹರಯ
ನಮಗದಷ್ಟೆ ಏತಕೆ?

ನಿದ್ದೆಗೊಮ್ಮೆ ನಿತ್ಯ ಮರಣ
ಎದ್ದ ಸಲ ನವೀನ ಜನನ
ನಮಗೆ ಏಕೆ ಬಾರದೋ?
ಎಲೆ ಸನತ್ಕುಮಾರದೇವ!
ಸಲೆ ಸಾಹಸಿ ಚಿರಂಜೀವ!
ನಿನಗೆ ಲೀಲೆ ಸೇರದೋ?

ಯುಗಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ.
ಹೊಸವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ
ನಮ್ಮನಷ್ಟೆ ಮರೆತಿದೆ!


ರಸಋಷಿ ಕುವೆಂಪು ಅವರ ‘ಯುಗಾದಿ’


ಸುರಲೋಕದ ಸುರನದಿಯಲಿ ಮಿಂದು,
ಸುರಲೋಕದ ಸಂಪದವನು ತಂದು,
ನವ ಸಂವತ್ಸರ ಭೂಮಿಗೆ ಬಂದು
ಕರೆಯುತಿದೆ ನಮ್ಮನು ಇಂದು!

ಗೀತೆಯ ಘೋಷದಿ ನವ ಅತಿಥಿಯ ಕರೆ;
ಹೃದಯ ದ್ವಾರವನಗಲಕೆ ತೆರೆ, ತೆರೆ!
ನವ ಜೀವನ ರಸ ಬಾಳಿಗೆ ಬರಲಿ,
ನೂತನ ಸಾಹಸವೈತರಲಿ!

ಗತವರ್ಷದ ಮೃತಪಾಪವ ಸುಡು, ತೊರೆ;
ಅಪಜಯ ಅವಮಾನಗಳನು ಬಿಡು; ಮರೆ;
ಕಳಚಲಿ ಬೀಳಲಿ ಬಾಳಿನ ಹಳೆಪೊರೆ,
ನವ ವತ್ಸರವನು ಕೂಗಿ ಕರೆ!

ಸಂಶಯ ದ್ವೇಷಾಸೂಯೆಯ ದಬ್ಬು;
ಸುಖಶ್ರದ್ಧಾ ಧೈರ್ಯಗಳನು ತಬ್ಬು,
ಉರಿಯಲಿ ಸತ್ಯದ ಊದಿನಕಡ್ಡಿ,
ಚಿರ ಸೌಂದರ್ಯದ ಹಾಲ್ಮಡ್ಡಿ!

ತೊಲಗಲಿ ದುಃಖ, ತೊಲಗಲಿ ಮತ್ಸರ,
ಪ್ರೇಮಕೆ ಮೀಸಲು ನವ ಸಂವತ್ಸರ!
ನಮ್ಮೆದೆಯಲ್ಲಿದೆ ಸುಖನಿಧಿ ಎಂದು
ಹೊಸ ಹೂಣಿಕೆಯನು ತೊಡಗಿಂದು!

ಮಾವಿನ ಬೇವಿನ ತೋರಣ ಕಟ್ಟು,
ಬೇವುಬೆಲ್ಲಗಳನೊಟ್ಟಿಗೆ ಕುಟ್ಟು!
ಜೀವನವೆಲ್ಲಾ ಬೇವೂಬೆಲ್ಲ;
ಎರಡೂ ಸವಿವನೆ ಕಲಿ ಮಲ್ಲ!

ಹೊಸ ಮರದಲಿ ಹೂ ತುಂಬಿದೆ ನೋಡು!
ಆಲಿಸು! ಜೇನಿನ ಹಬ್ಬದ ಹಾಡು!
ಜೀವನವೆಂಬುದು ಹೂವಿನ ಬೀಡು;
ಕವಿಯೆದೆ ಹೆಜ್ಜೇನಿನ ಗೂಡು!

ಕವಿಯೊಲ್ಮೆಯ ಕೋ! ಧನ್ಯ ಯುಗಾದಿ!
ಮರಳಲಿ ಇಂತಹ ನೂರು ಯುಗಾದಿ!
ಇದೆ ಕೋ ಹೊಸವರುಷದ ಸವಿಮುತ್ತು!
ಅದಕೊಂದಾಲಿಂಗನದೊತ್ತು!


ಮಲ್ಲಿಗೆಯ ಕವಿ ಕೆ.ಎಸ್.ನರಸಿಂಹಸ್ವಾಮಿಯವರ ‘ಯುಗಾದಿ’

ಮಾವು ನಾವು, ಬೇವು ನಾವು;
ನೋವು ನಲಿವು ನಮ್ಮವು.
ಹೂವು ನಾವು, ಹಸಿರು ನಾವು,
ಬೇವು ಬೆಲ್ಲ ನಮ್ಮವು.

ಹೊಸತು ವರುಷ, ಹೊಸತು ಹರುಷ-
ಹೊಸತು ಬಯಕೆ ನಮ್ಮವು
ತಳಿರ ತುಂಬಿದಾಸೆಯೆಲ್ಲ,
ಹರಕೆಯೆಲ್ಲ ನಮ್ಮವು.

ಬಂಜೆ ನೆಲಕೆ ನೀರನೂಡಿ
ಹೊಳೆಯ ದಿಕ್ಕು ಬದಲಿಸಿ
ಕಾಡ ಕಡಿದು ದಾರಿ ಮಾಡಿ
ಬೆಟ್ಟ ಸಾಲ ಕದಲಿಸಿ.

ಹಿಮಾಚಲ ನೆತ್ತಿಯಲಿ
ಧ್ವಜವನಿಟ್ಟು ಬಂದೆವು;
ಧ್ರುವಗಳಲ್ಲಿ ಹೆಜ್ಜೆಯೂರಿ
ಹೊಸನೆಲೆಗಳ ಕಂಡೆವು.

ಬಾನಸೆರೆಯ ಕಲ್ಪಲತೆಗೆ
ನಮ್ಮ ಕಿಡಿಯ ಮುತ್ತಿಗೆ.
ಮುಗಿಯಬಹುದು ನಾಳೆಯೊಳಗೆ
ದೇವತೆಗಳ ಗುತ್ತಿಗೆ!

ಹುಟ್ಟು ಬೆಂಕಿ ನಮ್ಮ ತಾಯಿ;
ಉಟ್ಟ ಸೀರೆ ಸಾಗರ.
ಅವಳ ಮುಗಿಲ ತುರುಬಿನಲ್ಲಿ
ಹೆಡೆಯ ತೆರೆದ ನಾಗರ.

ಅವಳ ಪ್ರೀತಿ ನಮಗೆ ದೀಪ;
ಅವಳ ಕಣ್ಣು ಕಾವಲು.
ಬಿಸಿಲ ತಾಪ, ಮಳೆಯ ಕೋಪ-
ಸಂತೋಷವೇ ಆಗಲೂ.

ಹೆಜ್ಜೆಗೊಂದು ಹೊಸ ಯುಗಾದಿ-
ಚೆಲುವು ನಮ್ಮ ಜೀವನ!
ನಮ್ಮ ಹಾದಿಯೋ ಅನಾದಿ,
ಪಯಣವೆಲ್ಲ ಪಾವನ.

‘ಯುಗಾದಿ ‘೮೭’ ಕವನದ ಎರಡು ಪದ್ಯಗಳು

ಹೊಸ ವರುಷ ಬಂತು ಮಾಂದಳಿರಿನಲ್ಲಿ,
ಮುಗಿವಿರದ ಚೆಲುವಿನಲ್ಲಿ,
ಹೂಬಿಸಿಲಿನಲ್ಲಿ, ಉಪವನಗಳಲ್ಲಿ,
ಎದೆ ತುಂಬಿದೊಲವಿನಲ್ಲಿ.

ಹೊಸ ವರುಷ ಬಂತು! ನಾನಿಲ್ಲಿ ನಿಂತು
ಹಾಡೊಂದ ನೂಲುತಿಹೆನು.
ಅಲ್ಲೊಂದು ಹಕ್ಕಿ ಇಲ್ಲೊಂದು ಹೂವು!-
ನಾನವನು ನೋಡುತಿಹೆನು.


ಪು.ತಿ.ನರಸಿಂಹಚಾರ್ ಅವರ ‘ಹೊಸ ವರುಷ ಬಹುದೆಂದಿಗೆ’ ಕವಿತೆಯ ಎರಡು ಪದ್ಯಗಳು

ಹೊಸ ವರುಷವು ಬಹುದೆಂದಿಗೆ?
ಮಹಾಪುರುಷ ತರುವಂದಿಗೆ
ಅಲ್ಪಾಹಂಕಾರಗಳ ನುಂಗುತಲಿ
ಮಹಾಹಂಕಾರದೊಂದಿಗೆ-

ಜಾಣ ಜಿತೇಂದ್ರಿಯ ಧಿರನಾವನೋ
ಚಾಣಿಕ್ಯನ ತೆರ ನಲ್ ಕೇಣದ ನೆಲೆಮತಿ
ಅಂಥವ ತರಬಲ್ಲನು ಹೊಸ ವರುಷ
ಅಂಥಿಂಥವರಿಂ ಬರಿ ಕಲುಷ


ಗೋಪಾಲಕೃಷ್ಣ ಅಡಿಗರ ‘ಯುಗಾದಿ’ ಕವಿತೆಯ ಎರಡು ಪದ್ಯಗಳು
ಯುಗಯುಗಾದಿಯ ತೆರೆಗಳೇಳುತಿವೆ, ಬೀಳುತಿವೆ
ಹೊಸಹೊಸವು ಪ್ರತಿ ವರುಷವು;
ಒಳಗೆ ಅದೋ ಕಾಣುತಿದೆ ಚೆಲುವಿರದ ನಲವಿರದ
ಕೊಳೆಯ ಬೆಳೆ;- ರಂಗಮಂದಿರವು!

ಈ ಯುಗಾದಿಯ ಮಾತು ಕೇಳುತಿದೆ ಮರಮರಳಿ
ಮೊದಲಾಗುತ್ತಿದೆ ಯುಗವು, ನರನ ಜಗವು;
ವರುಷವರುಷವು ನಮ್ಮ ಪಯಣ ಮೊದಲಾಗುತ್ತಿದೆ;
ಇದಕು ಮಿಗಿಲಿಲ್ಲ, ಹಾ, ನರಗೆ ಸೊಗವು!


ಕೆ.ಎಸ್.ನಿಸಾರ್ ಆಹಮದ್ ಅವರ ‘ವರ್ಷಾದಿ’


ವರ್ಷಾದಿಯ ತಿಳಿನಗೆಯ ಮೊಗವೆ
ಶುಭ ಯುಗಾದಿ ಕರೆವ ಸೊಗವೆ
ಋತುಗಳ ಗಣನಾಯಕ
ಶರಣೆನ್ನುವೆ ಶುಭದಾಯಕ.

ಹೊಸ ಬಟ್ಟೆಯ ತೊಟ್ಟು ಚೈತ್ರ
ಜಲದರ್ಪಣ ಮಗ್ನ ನೇತ್ರ
ಮುಗಿಲಿನ ಪಂಚಾಂಗ ತೆರೆಸಿ
ಕುಳಿತಿಹ ಫಲ ತಿಳಿಯ ಬಯಸಿ.

ಬೆವರ ಹೀರಿ ಬೆಳೆದ ಪೈರು
ಕಣಕಣದಲಿ ಹೊನ್ನ ತೇರು.
ಕಣಜ ತುಂಬಿ ತುಳುಕಿ ಹಿಗ್ಗಿ
ನಾಡಿಗೊದಗಿ ಬಂತು ಸುಗ್ಗಿ.

ಪ್ರತಿ ಯುಗಾದಿ ವಿಜಯದೊಸಗೆ
ಸತ್ವ ರಜೋಗುಣದ ಬೆಸುಗೆ
ಅಸುರ ವಧೆಯ ವೀರಗಾಥೆ
ಕನ್ನಡಿಗರ ಗೆಲವ ಗೀತೆ.

ಎರಡು ದಿನದ ಹಬ್ಬದಂದು
ಬೆಳಕಿನಲ್ಲಿ ಬಾಳು ಮಿಂದು
ಮೊದಲ ಚಂದ್ರ ವೀಕ್ಷಣೆ
ಜನಕೆ ತರಲಿ ರಕ್ಷಣೆ.

‘ಯುಗಾದಿ:೧೯೯೦’ ಕವಿತೆಯ ಎರಡು ಪದ್ಯಗಳು

ಹಳೆ ಯುಗಾದಿಯ ಹಾದಿ ಈ ಯುಗಾದಿಯು ಹಿಡಿದು
ಏರಿದೆ ಭವಾದ್ರಿಯನು ಏದಿ, ಏದಿ.
ಯಾವ ಉಡುಗೊರೆ ಜಗಕೆ ನೀಡಲಿಹುದೋ ಕಾಣೆ
ಪ್ರಮೋದೂತ ನಾಮದ ಸ್ವೈರತಾಮೋದಿ.

ಚೈತ್ರ ಮಾಂತ್ರಿಕ ಸ್ಪರ್ಶಕೆಲ್ಲ ಉದ್ಯಾನವನ
ಪಲ್ಲವಿಸಿ, ಕರೆಯೋಲೆ ಕಳಿಸುವಂತೆ-
ಸೌಭಾಂಗ್ಯ ಪಕ್ಷಿಕುಲ ಪ್ರತಿ ಬಾಳ್ವೆಯಲಿ ಸಂದು
ಹೊಸ ವರ್ಷ ನೆರೆಸಿರಲಿ ಸೊಗದ ಸಂತೆ.


ಜಿ.ಎಸ್.ಶಿವರುದ್ರಪ್ಪ ಅವರ ‘ಯುಗಾದಿಯ ಹಾಡು’


ಬಂದ ಚೈತ್ರದ ಹಾದಿ ತೆರೆದಿದೆ
ಬಣ್ಣ-ಬೆಡಗಿನ ಮೋಡಿಗೆ
ಹೊಸತು ವರ್ಷದ ಹೊಸತು ಹರ್ಷದ
ಬೇವು-ಬೆಲ್ಲದ ಬೀಡಿಗೆ.

ಕೊಂಬೆ ಕೊಂಬೆಯ ತುಂಬ ಪುಟಿದಿದೆ
ಅಂತರಂಗದ ನಂಬಿಕೆ
ಚಿಗುರು ಹೂವಿನ ಬಣ್ಣದಾರತಿ
ಯಾವುದೋ ಆನಂದಕೆ!

ಇದ್ದುದೆಲ್ಲವು ಬಿದ್ದುಹೋದರು
ಎದ್ದು ಬಂದಿದೆ ಸಂಭ್ರಮ.
ಕಿತ್ತುಕೊಂಡರು ಕೊಟ್ಟು ಸುಖಿಸುವ
ಸೋಲನರಿಯದ ಸಂಗಮ.

ಒಳಿತು ಕೆಡುಕೋ ಏನು ಬಂದರು
ಇರಲಿ ಎಲ್ಲಕು ಸ್ವಾಗತ
ಸ್ಪರ್ಧೆಯಿಲ್ಲದ ಶ್ರದ್ಧೆಯೊಂದೇ
ಸ್ಫೂರ್ತಿಯಾಗಲಿ ಸಂತತ.

ಹಳತು-ಹೊಸತೂ ಕೂಡಿ ಮೂಡಿಸುವಂಥ
ಪಾಕವ ನೋಡಿರಿ
ಎಲ್ಲ ರುಚಿಗೂ ರಸನೆಯಾಗುತ
ಪುಟ್ಷಿಗೊಳ್ಳುತ ಬಾಳಿರಿ.

ಯುಗ ಯುಗಾದಿಗೆ ಹೊಸತು ಹರ್ಷವು
ಬರಲಿ, ಬಾರದೆ ಹೋಗಲಿ;
ಬಂದ ಚೈತ್ರ ಚಿಗುರಿನಂದದ
ಮಂದಹಾಸವೆ ಉಳಿಯಲಿ.

‘ಯುಗಾದಿಯ ಪ್ರಶ್ನೆಗಳು’ ಕವಿತೆಯ ಒಂದು ಪದ್ಯ

ನಾನು, ನನ್ನಪ್ಪ, ಅವರಪ್ಪನಪ್ಪ,
ಮಗ, ಮೊಮ್ಮೊಗ, ಮರಿಮಗ, ಗಿರಿಮಗ
ಈ ಗಿರಿಗಿರಿ ತಿರುಗವೀ ಪುನರಪಿ
ಜನನಂ ಪುನರಪಿ ಮರಣಂ ಚಕ್ರ
ಗತಿಯೊಳಗೆ ದಿನಾ ಬೆಳಕಿಗೆ ಎದ್ದು
ಕತ್ತಲೆಗೆ ಬಿದ್ದು ಸುತ್ತುತ್ತಲೇ ಇರುವ
ಈ ಭವ ಭವದ ಮಧ್ಯೆ ಪ್ರಭವ
ನಾಮ ಸಂವತ್ಸರದಲ್ಲಿ ನಿಂತಿರುವ ಈ ನನಗೆ
ಯಾವುದು ಮೊದಲು, ಯಾವುದು ಕೊನೆ?


ಎಚ್.ಎಸ್.ವೆಂಕಟೇಶಮೂರ್ತಿ ಅವರ ‘ಯುಗಾದಿ’


ನಾವು ನಮ್ಮೂರಿಂದ
ನಿಮ್ಮ ಊರಿಗೆ ಹೊರಟ ದಾರಿಯಲ್ಲಿ
ಇದು ಒಂದು ಮೈಲಿಗಲ್ಲು!
ಸಿರಿವಂತ ಕಾರಿನಲಿ,
ಬಡವ ಬರಿಗಾಲಿನಲಿ
ನಡೆದು ಬಂದುದು ಇದೇ ದಾರಿಯಲ್ಲಿ!

ಇಂಥ ಒನ್ ವೇ ಟ್ರಾಫಿಕ್ಕಿನಲ್ಲಿ
ಕಲ್ಲು ಹೂಗಳ ಚೆಲ್ಲಿ,
ಮುಳ್ಳು ಮರಗಳ ನೆಟ್ಟು,
ಅದರ ನಡುವೆಯೆ ಮಧುರ ಸವಿಜೇನ ಹಲ್ಲೆಗಳ
ಜೋಲಿಯಾಡಲು ಬಿಟ್ಟು,
ದಾರಿಯಲಿ ಅಲ್ಲಲ್ಲಿ,
ಗುಂಡಿಗಳ ತೋಡಿ,
ಮೇಲೆ ಹುಲ್ಲನು ಹಾಸಿ
ಜೀವಿಗಳ ಖೇಡ್ಡಾ ನೋಡುವ ಸಾರಿಗೇ ಸಂಸ್ಥೆಯ ಒಡೆಯ
ಯಾರೆಂಬುದೇ ಯಾರೂ ಅರಿಯದಂತಹ ಗುಟ್ಟು!
ಅದು ರಟ್ಟಾಗದಂತೆ
ಮುಂದೆ ಇಬ್ಬನಿ ತುಂಬಿ ದಟ್ಟವಾಗಿದೆಯಂತೆ!

ಇಷ್ಟು ದೂರವ ಹೇಗೋ ನಡೆದು ಬಂದೆವು ನಾವು.
ನಮ್ಮ ಕಣ್ಣೆದುರಿಗೇ ಬಿದ್ದವರು ಬಿದ್ದರು.
ಬಿಸಿಲಿನಲಿ, ಮಳೆಯಲ್ಲಿ
ರಾತ್ರಿಯಲಿ ಹಗಲಲ್ಲಿ
ನಡೆದಿದ್ದೆ ನಡೆದಿದ್ದು
ಹತ್ತಿದ್ದು, ಇಳಿದಿದ್ದು,
ಮುಗ್ಗುರಿಸಿ ಬಿದ್ದು ಎದ್ದದ್ದು,
ಹೊಸ ಹೊಣೆಯ ಹೆತ್ತದ್ದು, ಹೊತ್ತದ್ದು,
ಮಳೆಯಲ್ಲಿ ನೆಂದು ಬಿಸಿಲಲ್ಲಿ ಒಣಗಿ

ಆದರೂ ಹೆಣಗಿ
ಮುಳ್ಳು ಮರದಡಿಯೇ ತುಸು ಮಲಗಿ
ಮಗುವಾಗಿ
ಆತ್ತು ನಕ್ಕಿದ್ದು!

-ಎಲ್ಲಾ ಇಂದು ಹೆಗಲ ಮೇಲಿನ ಗಟ್ಟಿ ಪೆಟ್ಟಿಗೆಯ ತಳದಲ್ಲಿ ನುಸಿ ಹಿಡಿದು ನವೆಯುತ್ತ
ಅಲ್ಲೊಂದು ಇಲ್ಲೊಂದು ಉಳಿದಿದ್ದು!
ಹಳೆಯ ಫೈಲಿನ ಮಸುಕು ಹಾಳೆಯಂತೆ.

ಮಂಜು ಆವರಿಸಿರುವ ಮುಂದಿರುವ ದಾರಿಯಲಿ
ನಡೆದವರೆ ಇಲ್ಲ!
ಇನ್ನು ನಡೆ-ನಡೆದಂತೆ ಹೆಜ್ಜೆ-ಹೆಜ್ಜೆಯ ಗುರುತು
ಹೂವಾಗಿ ಅರಳಬೇಕು!
ಅಥವಾ-
ಹಾವಾಗಿ ಹೊರಳಬೇಕು!

ಬಗೆಬಗೆಯ ಆ ಗುರುತ
ನನ್ನ ಕೈ ಕ್ಯಾಮರದಿ ಹಿಡಿಯಬೇಕು!
ಅದಕಾಗಿಯೇ ನೀವು, ನಾವು ಅವರೂ ಕೂಡ
ಮುಂದೆ ಸಿಗಬಹುದಾದ ಮೈಲುಗಲ್ಲಿನವರೆಗೆ
ನಡೆಯಬೇಕು!

Thursday 7 April 2016

ಶ್ರೀಕಾರ....

ಎಲ್ಲರಿಗೂ ಯುಗಾದಿಯ ಶುಭಾಶಯಗಳು...

 ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು